ರಾಜ್ಯ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶಾಂತಿನಗರ ಆಯ್ಕೆ.
ಪುತ್ತೂರು : (ಅ.14) ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿ ಸುದ್ದಿ ಬಿಡುಗಡೆ ದಿನ ಪತ್ರಿಕೆಯ ಮುಖ್ಯ ವರದಿಗಾರ ಸಂತೋಷ್ ಕುಮಾರ್ ಶಾಂತಿನಗರರವರು ಆಯ್ಕೆಯಾಗಿದ್ದಾರೆ.
ಇಂಡಿಯನ್ ಜರ್ನಲಿಸ್ಟ್ ಯೂನಿಯನ್ ಜತೆ ಸಂಯೋಜಿತಗೊಂಡಿರುವ ಮತ್ತು ಸರಕಾರದ ಕಾರ್ಮಿಕ ಇಲಾಖೆಯಲ್ಲಿ ಸಂಯೋಜನೆಗೊಂಡಿರುವ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷ ಲಕ್ಷ್ಮಣ ಕುಂದರ್, ಪ್ರಧಾನ ಕಾರ್ಯದರ್ಶಿ ತಾರನಾಥ ಗಟ್ಟಿ ಕಾಪಿಕಾಡು ಮತ್ತು ಕೋಶಾಧಿಕಾರಿ ಜ್ಯೋತಿಪ್ರಕಾಶ್ ಪುಣಚರವರ ಉಪಸ್ಥಿತಿಯಲ್ಲಿ ಅ.14ರಂದು ಪುತ್ತೂರಿನ ರೋಟರಿ ಟ್ರಸ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ.
ಕೋಡಿಂಬಾಡಿ ಗ್ರಾಮದ ಶಾಂತಿನಗರ ನಿವಾಸಿಯಾಗಿರುವ ಸಂತೋಷ್ ರವರು ಈ ಹಿಂದೆ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎರಡು ಬಾರಿ ಕಾರ್ಯ ನಿರ್ವಹಿಸಿದ್ದರು. ಶಾಂತಿನಗರ ತ್ರಿವೇಣಿ ಯುವಕ ಮಂಡಲದ ಅಧ್ಯಕ್ಷರಾಗಿ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷರಾಗಿ, ಪೂಜಾ ಸಮಿತಿಯ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರಾಗಿ, ಶಾಂತಿನಗರ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಶಾಂತಿನಗರ ಅಂಗನವಾಡಿ ಕೇಂದ್ರದ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರಾಗಿ, ಬಾಲ ವಿಕಾಸ ಸಮಿತಿಯ ಸದಸ್ಯರಾಗಿ, ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿಹಬ್ಬ ಸಮಿತಿಯ ಉಪಾಧ್ಯಕ್ಷರಾಗಿ, ಪುತ್ತೂರು ಯುವವಾಹಿನಿ ಘಟಕದ ನಿರ್ದೇಶಕರಾಗಿ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಹ ಸಂಚಾಲಕರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಂತೋಷ್ ಕುಮಾರ್ ರವರು ಭಾಷಣಕಾರರಾಗಿ, ಕಾರ್ಯಕ್ರಮ ನಿರೂಪಕರಾಗಿಯೂ ಗುರುತಿಸಿಕೊಂಡಿದ್ದಾರೆ.